Saturday, March 3, 2012

ನನಗೊಬ್ಳು ನಾದಿನಿ ಬಂದ್ಳು


ನನಗೊಬ್ಬನೇ ತಮ್ಮ. ಅಮ್ಮನ ಜೊತೆಗೆ ಕೃಷಿಗೆ ಯಜಮಾನ. ಮೊನ್ನೆ-ಮೊನ್ನೆ ಅವನಿಗೂ ಮದುವೆ ಆಯಿತು. ನನ್ನ ಮದುವೆ ಹಳ್ಳಿ ಸೊಬಗನ್ನೆಲ್ಲಾ ಮೈತುಂಬಿಸಿಕೊಂಡಿರಲಿಲ್ಲ. ಆದರೆ, ತಮ್ಮನಿಗೆ ಚಾನ್ಸ್ ಸಿಕ್ಕಿತು. ಹಸಿರು ವನದ ನಡುವಿರುವ ನಮ್ಮನೆಯಲ್ಲೇ ಮದುವೆ.

ವಾರದ ಮೊದಲೇ ಮನೆಯಂಗಳದಲ್ಲಿ ತೆಂಗಿನ ಮಡಲಿನ ಚಪ್ಪರದ ಶೃಂಗಾರ. ಮಾವಿನ ತಳಿರುಗಳ ತೋರಣ ಚಪ್ಪರಕ್ಕೆ ರಂಗು ತಂದಿತ್ತು. ಅಗಳವಾದ ಅಂಗಳ. ಸುತ್ತಲೂ ಅಮ್ಮ ನೆಟ್ಟ ಹೂವಿನ ಗಿಡಗಳು. ನಮ್ಮನೆಯ ಬಾವಿಯಲ್ಲಿ ನೀರಿಗೆ ಬರವಿಲ್ಲ, ಹಾಗಾಗಿ, ಹೂವಿನ ಗಿಡಗಳೂ ಹಸುರು ಹಸುರಾಗಿವೆ. ಅಂಗಳದಿಂದ ಇಳಿಯುತ್ತಲೇ ತೋಟ, ಸುತ್ತಮುತ್ತ ದೊಡ್ಡ ದೊಡ್ಡ ಮರಗಳು. ಮದುವೆಗೆಂದು ಸಿಂಗಾರಗೊಂಡ ಮನೆಯೇ ಮದುಮಗಳಂತೆ ಕಂಗೋಳಿಸುತ್ತಿತ್ತು.

ಮದುವೆಗೆ ತಮ್ಮನದೇ ಓಡಾಟ. ಅಮ್ಮನಿಗೆ ಆರೋಗ್ಯದ ಚಿಂತೆ. ದೂರದೂರಿನಲ್ಲಿ ಗಂಡನ ಹುಡುಕಿದ ನನಗೆ ಮನೆ ಹತ್ತಿರವಿರಬಾರದಿತ್ತೇ ಅನಿಸುತ್ತಿದೆ ನಿಜ. ತಮ್ಮನ ಮದುವೆಗೆ ನಾನೇ ಓಡಾಟ ಮಾಡಬೇಕನಿಸಿತ್ತು. ಅನಿವಾರ್ಯ ಬದುಕು. ಬೆಂಗಳೂರಲ್ಲಿ ಇನ್ನೊಂದು ಅಮ್ಮ ಸಿಕ್ಕಿದ್ದಾರೆ, ಅದು ಅತ್ತೆಮ್ಮ. ಮೂರು ದಿನಗಳ ಮೊದಲು ತವರು ಸೇರಿದೆ. ತಮ್ಮನಿಗೆ ಗಡಿಬಿಡಿ.
ಮದುವೆ ಗಂಡಿಗೆ ರೆಸ್ಟ್ ಇಲ್ಲ. ಜೊತೆಗೆ ವಾರದ ಮೊದಲೇ ತಯಾರಿ. ಸುತ್ತಮುತ್ತಲಿನ ಗೌಡ್ರ ಹೆಂಡ್ತಿಯರು ಮನೆಯಲ್ಲಿ ಠಿಕಾಣಿ.



ನಮ್ಮ ಅಪ್ಪನ, ಅಜ್ಜಿಯ ಕಡೆಯವರೆಲ್ಲಾ ಮನೆ ತುಂಬಿಕೊಂಡಿದ್ದರು. ಮಾತು, ಹಾಸ್ಯ, ನಗು, ಖುಷಿ-ಖುಷಿಯ ಜಾತ್ರೆ. ನನ್ನ ಅಜ್ಜನ ಕಡೆಯವರು ಆರು ಮಂದಿ ಅತ್ತಿಗೆ ಆಗಬೇಕಾದವ್ರು ಇದ್ದಾರೆ. ಎಲ್ಲರೂ ಎರಡು ದಿನ ಮೊದಲೇ ಮನೆ ಸೇರಿದ್ದರು. ಅವರು ಬಂದ್ರೆ ಸಾಕು ಮನೆಯಲ್ಲಿ ಜನಜಾತ್ರೆ. ಅಡುಗೆ ಮನೆಯಲ್ಲೂ ಅವರದೇ ಕಾರುಬಾರು. ನಮ್ಮನೆಯ ಹಿಂದೆ ಅಡುಗೆಗೆಂದೇ ಚಪ್ಪರದ ಹಾಲ್ ರೆಡಿಯಾಗಿತ್ತು. ಸುತ್ತಮುತ್ತಲಿನ ಮನೆಗಳಿಂದಲೇ ಪಾತ್ರೆಗಳನ್ನು ತಂದದ್ದಾಯಿತು.ಇದಕ್ಕೇನೂ ಬಾಡಿಗೆ ರೊಕ್ಕವಿಲ್ಲ. ಒಬ್ಬೊಬ್ಬರಿಗೆ ಒಂದೊಂದು ಕೆಲ್ಸ. ಸಾಗಣಿ ಸಾರಿದ ಅಂಗಳದಲ್ಲೇ ತರಕಾರಿ ಹಚ್ಚುವ ಕೆಲಸ

ಮದುವೆಗೆ ಮೊದಲ ದಿನ ಮದರಂಗಿ ಶಾಸ್ತ್ರ. ರಾತ್ರಿಯಿಡೀ ಪರಸ್ಪರ ಅಂಗೈಯಲ್ಲಿ ಚಿತ್ತಾರ ಬಿಡಿಸುವ ಕೆಲಸ. ಆಗಾಗ, ನಡುರಾತ್ರಿಯಲ್ಲೂ ಪಟಾಕಿಗಳ ಸದ್ದು. ಯಾರಿಗೂ ನಿದ್ದೆಯಿಲ್ಲ. ಹಾಡು-ಆಟಗಳಲ್ಲೇ ಕಳೆದುಹೋಗುವ ಸಮಯ. ಚಂದ್ರ ಮರೆಯಾಗಿ ಸೂರ್ಯ ಕಾಣುವ ತನಕವೂ ಮಾತಿನ ಜಾತ್ರೆ.

ಸೂರ್ಯ ಮೇಲೆರುವ ಹೊತ್ತಿಗೇ ಹೆಣ್ಣಿನ ಕಡೆಯವರ ದಿಬ್ಬಣ. ಲುಂಗಿ-ರುಮಾಲು ಸುತ್ತಿದ ಬಂಟರು. ಮೈ ತುಂಬಾ ಒಡವೆಯಲ್ಲಿ ಸೀರೆಯುಟ್ಟ ಹೆಂಗಳೆಯರ ನಗೆಚೆಲುವು. ತೋಟದಲ್ಲೆಲ್ಲಾ ಓಡಾಡಿ ಖುಷಿಪಡುವ ಪುಟಾಣಿಗಳ ಕಲರವ. ಮದುವೆಯಾಗದ ಗಂಡುಮಕ್ಕಳ ಕಣ್ಣಲ್ಲಿ ಹುಡುಕಾಟ. ನನ್ನ ಯಾರು ನೋಡುತ್ತಾರೋ ನಾಚಿಕೆಯಲ್ಲಿ ಮುದುಡಿದ ಹುಡುಗಿರ ಕಣ್ಣುಗಳು. ಅಕ್ಕನ ಜೊತೆಗೆ ಆಗಾಗ ಕ್ಯಾಮರಾಕ್ಕೆ ಪೋಸು ಕೊಡುವ ಮದುಮಗಳ ತಂಗಿ. ಚಿನ್ನ-ಬಣ್ಣಗಳಿಂದ ದೂರವಿದ್ದ ನನಗೆ ಅಮ್ಮನಿಂದ ಬೈಗುಳ. ಕೈ ತುಂಬಾ ಬಳೆ ಹಾಕು, ಒಡವೆ ಹಾಕೋ, ಮುಡಿಗೆ ಹೂವ ಮುಡಿ, ನೀಟಾಗಿ ಸೀರೆಯುಟ್ಟುಕೋ,..ಹೇಳಿ ಹೇಳಿ ಅಮ್ಮನಿಗೇ ಸುಸ್ತು. ಮಗಳ ಬಗ್ಗೆ ಕೊಂಚ ಕೋಪ. ಅಂತೂ ಮದುವೆ ಮುಗಿಯಿತು. ಮನೆಗೆ ಮಗಳೊಬ್ಬಳು ಬಂದ ಖುಷಿ ಅಮ್ಮನಿಗೆ, ಹೆಂಡ್ತಿ ಬಂದ ಖುಷಿ ತಮ್ಮನಿಗೆ, ಅಮ್ಮನ ಮಾತುಗಳಿಗೆ ಕಿವಿಯಾಗಿ, ಬದುಕಿಗೆ ಸಾಥ್ ನೀಡುವ ಗಟ್ಟಿಗಿತ್ತಿ ನಾದಿನಿ ಬಂದ ಖುಷಿ ನನಗೆ.

Wednesday, February 1, 2012

ನಮ್ಮೂರಿಗೆ ಕರೆಂಟು ಬರುತ್ತಿದೆ....



ನಮ್ಮೂರಿಗೆ ಕರೆಂಟು ಬರುತ್ತಿದೆ. ಕಂಬಗಳನ್ನು ಹಾಕೋಕೆ ಗುಂಡಿ ತೋಡಿದ್ದಾರೆ. ಏಪ್ರಿಲ್ ಒಳಗೆ ಕರೆಂಟು ಬರಬಹುದು ಮಗಾ. ಆಮೇಲೆ ಸೀಮೆಎಣ್ಣೆ ಖರ್ಚಿಲ್ಲ. ನಿಂಗೆ ಊರಿಗೆ ಬಂದ್ರೆ ಬೋರಾಗಕ್ಕಿಲ್ಲ. ಕರಂದ್ಲಾಜೆ ಶೋಭಕ್ಕನೇ ಕರೆಂಟು ಕಳಿಸಿರಬೇಕು....ಹೀಗೆ ಪಕ್ಕದ್ಮನೆ ಅಜ್ಜಿಯ ನಾನ್ ಸ್ಟಾಪ್ ಮಾತುಗಳು ಮುಂದುವರೆಯುತ್ತಲೇ ಇದ್ದವು.
ಬೆಂಗಳೂರಿನಿಂದ 8 ಗಂಟೆಗಳ ಪ್ರಯಾಣ ಮಾಡಿ ನಮ್ಮನೆಗೆ ತಲುಪುವಷ್ಟರಲ್ಲಿ ಉಸ್ಸಪ್ಪಾ ಎಂದು ಜಗಲಿ ಮೇಲೆ ಕುಳಿತು ಒಂದು ಚೊಂಬು ನೀರು ಕುಡಿದು ಸುಧಾರಿಸಿಕೊಳ್ಳುತ್ತಿದ್ದೆ. ಹೀಗಿದ್ದರೂ ನಾನು ಊರಿಗೆ ಹೋದ ಖುಷಿಯಲ್ಲಿ ಅಜ್ಜಿ ಕರೆಂಟು ಪುರಾಣವನ್ನು ಹೇಳುತ್ತಲೇ ಇತ್ತು. ಪುತ್ತೂರು ತಾಲೂಕಿನ ದೋಳ್ಳಾಡಿ ಗ್ರಾಮದಲ್ಲಿ ಕಳೆಂಜೋಡಿ ಎಂಬಲ್ಲಿರುವುದು ನಮ್ಮನೆ. ಸುತ್ತಲೂ ದಟ್ಟ ಕಾಡು, ಹಸಿರು ಹಸಿರು. ವರ್ಷವಿಡೀ ಕೂಲ್ ಕೂಲ್. ನೀರಿಗೆ ಬರವಿಲ್ಲ. ಕೂಲಿ-ನಾಲಿಗೆ ಬರವಿಲ್ಲ. ಊರಮಂದಿಗೆಲ್ಲ ಸಾಹುಕಾರರು. ತೋಟವಿದೆ, ಬೇಕಾದಷ್ಟು ಜಮೀನಿದೆ. ಅಡಿಕೆ, ತೆಂಗಿನ ಗಿಡಗಳು ಬೇಸಿಗೆಯಲ್ಲೂ ಹಸಿರಾಗಿರುತ್ತವೆ. ತೋಟ ತುಂಬಾ ದನಕರುಗಳು ಅಂಬಾ ಅನ್ನುತ್ತವೆ. ಇಲ್ಲಿರುವುದು ಬರೇ ಹತ್ತು ಮನೆ. ದ್ವೀಪದಂತೆ, ಆದರೆ ಸುತ್ತಲೂ ನೀರಿಲ್ಲ, ಬದಲಾಗಿ ಆಕಾಶದೆತ್ತರಕ್ಕೆ ಬೆಳೆದ ಮರಗಳಿವೆ. ಹಾಗಾಗಿ, ಈ ಕರೆಂಟು ಮರಗಳನ್ನು, ಕಾಡನ್ನು ದಾಟಿ ಬರಬೇಕು. ಇಷ್ಟು ವರ್ಷಗಳ ಕಾಲ ನಮ್ಮೂರಿಗೆ ಕರೆಂಟು ಕನಸಾಗಿತ್ತು. ಈಗ ಗುಂಡಿ ತೋಡಿದ್ದಾರೆ


ನಮ್ಮ ಅಮ್ಮ ಸಣ್ಣವರಿರುವಾಗ ಮನೆಮುಂದೆ ಆನೆ, ಹುಲಿ ನೋಡಿದ್ದಾರಂತೆ. ಈಗಲೂ ಕಡವೆ, ಮೊಲ, ಕಾಡುಹಂದಿ, ಕೋತಿಗಳು ಅಂಗಳಕ್ಕೆ ಬಂದು ನಕ್ಕು ಓಡುತ್ತವೆ. ಅಂಥ ಕಾಡುಹಳ್ಳಿಯಿಂದ ಸ್ಕೂಲಿಗೆ ಹೋಗಬೇಕಾದರೆ ಕನಿಷ್ಠ ಏಳು ಕಿ.ಮೀ. ನಡೆಯುತ್ತಿದೆ. ಹೋಗುವಾಗ ಏಳು, ಬರುವಾಗ ಏಳು. ದಿನದಲ್ಲಿ 14 ಕಿ.ಮೀ. ನಡಿಗೆ. ಆಗ ಕಾಲುಗಳು ದಣಿಯುತ್ತಿರಲಿಲ್ಲ. ಸುಸ್ತು ಅನ್ನೋ ಪದವೇ ಗೊತ್ತಿರಲಿಲ್ಲ. ಓಡಾಡಲು ಗಾಡಿ ಬೇಕನಿಸುತ್ತಿರಲಿಲ್ಲ. ಚಿಮಿಣಿ ದೀಪದಡಿ ಓದಿದರೂ ತರಗತಿಯಲ್ಲಿ ಮೊದಲ ಸ್ಥಾನ ಬಿಟ್ಡುಕೊಡುತ್ತಿರಲಿಲ್ಲ. ಪಠ್ಯ-ಪಠ್ಯೇತರ ಎರಡರಲ್ಲೂ ಮೊದಲ ಸ್ಥಾನ ನನ್ನದಾಗಿತ್ತು. ಊರಿಗೆ ಹೋದಾಗ ಎಲ್ಲವೂ ನೆನಪುಗಳು ಕಣ್ಣಂಚಿನಲ್ಲೇ ಸರಿದುಹೋದವು.

ಕರೆಂಟಿಲ್ಲದ ಆ ಊರಿನಲ್ಲಿ, ಅಷ್ಟೊಂದು ದೂರ ನಡೆದು ಓದಿದ್ದೆ. ಅದೇ ದಟ್ಟಕಾಡಿನ ನಡುವಿನ ಮನೆಯಲ್ಲಿ ಅಮ್ಮ ಕಲಿಸಿದ ಬದುಕಿಗೆ ರೆಕ್ಕೆ ಕಟ್ಟಿ ಬೆಂಗಳೂರಿಗೆ ಹಾರಿಬಂದಿದ್ದು. ಈಗ ಊರಿಗೆ ಹೋದರೆ 1 ಕಿ.ಮೀ. ನಡೆಯುವುದೂ ಕಷ್ಟವಾಗುತ್ತಿದೆ. ಬೆಂಗಳೂರಿನಿಂದ ಊರಿಗೆ ಹೋದಾಗ ಅಮ್ಮ ಸಂಜೆ ಚಿಮಿಣಿ ದೀಪ ಹಚ್ಚಿ ಹೇಳುತ್ತಾಳೆ, ಬೆಂಗಳೂರಿನಲ್ಲಿ ಕರೆಂಟು ನೋಡಿ, ಇಲ್ಲಿ ರಾತ್ರಿ ಬೋರ್ ಅನಿಸಬಹುದೆಂದು!

ಒಂದು ಸಲ ಅಮ್ಮ ಹೇಳಿದ್ದಳು: ಮೆಣಸಿನಕಾಯಿ ಗಿಡ ಕೊಡ್ತೀನಿ. ತಕೊಂಡು ಹೋಗಿ ನೆಡು ಎಂದು. ಅಮ್ಮನ ಮಾತು ನನಗೆ ಅಚ್ಚರಿಯಾದರೂ ಅವಳಿಗೆ ಸಹಜ. ನಾನು ಹೇಳಿದೆ: ಬೆಂಗಳೂರಲ್ಲಿ ಮೆಣಸಿನಗಿಡ ಹಾಕೋಕೆ ಜಾಗ ಸಿಗಲ್ಲ ಎಂದು. ಬಳಿಕ ಅಮ್ಮನ ಒಂದು ವಾರದ ಮಟ್ಟಿಗೆ ಬೆಂಗಳೂರಿಗೆ ಕರೆದುಕೊಂಡು ಬಂದೆ. ಒಂದು ವಾರ ನಮ್ಮನೆ ಅವಳಿಗೆ ಬಂಧನ ಅನಿಸಿಬಿಟ್ಟಿತು. ಬರೇ ವಾಹನ, ಕಟ್ಟಡಗಳೇ ಇವೆ. ಅಲ್ಲಿ. ಒಂದೇ ಒಂದು ಹಸಿರು ಗಿಡನೂ ಕಾಣಿಸಲ್ಲ ಅಂದಳು. ಒಂದು ವಾರದ ಬಂಧನದಿಂದ ಕಳಚಿ ವಾಪಸ್ ಊರಿಗೆ ಹೋದವಳು ಊರ ಮಂದಿ ಹೇಳಿದಾಗ, ಅಲ್ಲಿ ಕೃಷಿ, ತೋಟ, ಗದ್ದೆ, ದನಗಳು ಏನೂ ಇಲ್ಲ. ಬರಡು ಭೂಮಿ ಅಂದ್ಳತೆ.





Sunday, December 18, 2011

ಹೆಣ್ಣು- ರಾಜಿ

ಅದು ಅಪ್ಪ ಹೋದ ಮರುದಿನ. ಅಪ್ಪ ನಮ್ಮನ್ನೆಲ್ಲಾ ಬಿಟ್ಟು ದೂರ ಹೋಗಿದ್ದ. ಅಮ್ಮ ಒಬ್ಬಳಾಗಿದ್ದಳು. ಕಣ್ಣೀರನ್ನೆಲ್ಲಾ ನುಂಗಿ ಕಲ್ಲಾಗಿದ್ದಳು. ರಾತ್ರಿ ಇಡೀ ನಿದ್ದೆ ಮಾಡದ ಅಮ್ಮ ಸೂರ್ಯ ಬರುವ ಮೊದಲೇ ಬಾಗಿಲು ತೆರೆದಿದ್ದಳು.
ಎದುರುಮನೆಯ ಅಮ್ಮನ ವಯಸ್ಸಿನ ಹೆಂಗಸು ನಿತ್ಯ ಸಂಜೆ ಜಗಲಿಕಟ್ಟೆಯಲ್ಲಿ ಹಾಜರಾಗುವಳು. ಸುಖ-ದುಃಖವೆಂದು ಮಾತಿಗಿಳಿಯುವಳು. ಅಪ್ಪ ಹೋದ ದಿನ ಅಮ್ಮನಿಗೆ ಸಮಾಧಾನದ ಮಾತುಗಳ ಹೇಳಿದವಳು.
ಆದರೆ, ಅಪ್ಪ ಹೋದ ಮರುದಿನ ಬಾಡಿಹೋದ ಮುಖದೊಂದಿಗೆ ಅಮ್ಮ ಬಾಗಿಲು ತೆರೆದಾಗ ಎದುರುಮನೆಯ ಬಾಗಿಲು ದಡಕ್ಕಂತ ಮುಚ್ಚಿತು. ದರಿದ್ರ, ಗಂಡ ಕಳಕೊಂಡವಳು! ಎಂದು ಆಕೆ ಉಸುರಿದ್ದು ಅಮ್ಮನ ಕಿವಿಗೆ ಬೀಳದಿರಲಿಲ್ಲ, ಅಮ್ಮನ ಕಣ್ಭಲ್ಲಿ ಕಣ್ಣೀರು ಬತ್ತಿಹೋಗಿತ್ತು. ಮುಚ್ಚಿದ ಮನೆಬಾಗಿಲು ಕಂಡು ನಿಟ್ಟುಸಿರು ಬಿಟ್ಟು ಅಮ್ಮ ಮೌನವಾದಳು.
***********
ಅಂದು ಅಪ್ಪನ ವೈಕುಂಠ ಸಮಾರಾಧನೆ ದಿನ. ಮುತ್ಯೈದೆಯರಿಂದ ಅರಿಶಿನ ಕುಂಕುಮ ಕೊಡಲು ಆದೇಶಿಸಿದರು. ಬೆಳ್ಲಿ ತಟ್ಟೆ ಎತ್ತಿಕೊಂಡು ನಾನು ಸರತಿ ಸಾಲಿನಲ್ಲಿ ಕುಳಿತು ಅರಿಶಿನ, ಕುಂಕುಮ ಹಂಚಿದೆ. ಮುತ್ಯೈದೆಯರ ಸರತಿ ಸಾಲಿನಲ್ಲಿ ಕುಳಿತ ಅಮ್ಮ ಸುಮ್ಮನಾದಳು. ಅಪ್ಪನಿರುವಾಗ ಅರಿಶಿನ ಕುಂಕುಮ ಎಂದರೆ ಮುಂದೆ ಬಂದು ಮುತ್ಯೈದೆ ಭಾಗ್ಯ ನೀಡು ದೇವಾ ಎಂದು ತಾಳಿಗೆ ಅರಿಶಿನ ಹಚ್ಚುತ್ತಿದ್ದ ಅಮ್ಮನಿಗೆ ಅರಿಶಿನ ಪಡೆಯುವ ಕನಿಷ್ಠ ಭಾಗ್ಯ ಇಲ್ಲದ ಈ "ಕಟ್ಟುಪಾಡು'ಗಳ ಬಗ್ಗೆ ಉತ್ತರವಿಲ್ಲದೆ ನಾನೂ ರಾಜಿಯಾಗಿದ್ದೆ!

Wednesday, December 7, 2011

ಅಗಲಿದ ಅಪ್ಪನೆಂಬ ಅಕ್ಕರೆಗೆ...


ನೀನು ಸುಮ್ಮನೆ ಮಲಗಿದ್ದೆ, ಮೌನವಾಗಿ. ಆ ಗಾಜಿನ ಪೆಟ್ಟಿಗೆಯೊಳಗೆ ಮಲಗಿದ್ದ ನಿನ್ನ ನೋಡುವಾಗ ನಿನ್ನ ಬಿಳಿಮೀಸೆಯಡಿಗಿನ ಮುಗ್ಧ ನಗು ನೆನಪಾಗುತ್ತಿತ್ತು. ಮತ್ತೆ ಮಾತಿಗೆ ತುಟಿಬಿಚ್ಚುವಂತೆ ಭಾಸವಾಗುತ್ತಿತ್ತು. ಪುಟ್ಟಾ ಎಂದು ಕೂಗುತ್ತಿಯೇನೋ, ಕಣ್ಣುಗಳಲ್ಲೇ ನಗುತ್ತಿಯೇನೋ ಅಂದುಕೊಂಡೆ.
ಆದರೆ ನೀ ನಗಲಿಲ್ಲ, ನಾನು ಅತ್ತೆ, ಗೋಳಾಡಿದೆ. ಮನಸ್ಸು, ಹೃದಯ ಕಣ್ಣೀರಾದರೂ ನೀನು ಬರಲೇ ಇಲ್ಲ. ನಿನ್ನ ಅಪ್ಪಾ ಎಂದು ಕೂಗುವ ಹಕ್ಕನ್ನೂ ನಾ ಕಳೆದುಕೊಂಡೆ. ಅಪ್ಪನಿಲ್ಲದ ಜಾಗದಲ್ಲಿ ನೀನು ಅಪ್ಪನಾಗಿ ಬಂದಾಗ ನಾನು ಮಾಮ ಎಂದು ಮಮಕಾರ ತೋರಲಿಲ್ಲ, ಅಪ್ಪಾ ಎಂದೆ. ನೀನು ಸೊಸೆ ಎನ್ನಲಿಲ್ಲ, ಮಗಳೇ ಎಂದು ಎದೆಗಪ್ಪಿಕೊಂಡೆ.
ಆ ಸಂಜೆ ಹೊತ್ತು ನೀನು ಇದ್ದಕಿದ್ದಂತೆ ಉಸಿರಾಡುವುದನ್ನು, ಮಾತನಾಡುವುದನ್ನು, ನಗುವುದನ್ನು, ನಿನ್ನ ಪಾಡಿಗೆ ಗೊಣಗುವುದನ್ನು, ಅಮ್ಮನ ಜೊತೆ ಸುಖಾಸುಮ್ಮನೆ ಜಗಳವಾಡುವುದನ್ನು ನಿಲ್ಲಿಸಿದಾಗ ದೇವರ ಮೇಲೆ ಕೆಟ್ಟ ಸಿಟ್ಟು ಬಂತು! ನಿನ್ನ ಮರಳಿ ಕೊಡು ಎಂದು ಕಣ್ಣೀರಿಟ್ಟರೂ ದೇವರು ಕಿಂಚಿತ್ತೂ ದಯೆ ತೋರಲೇ ಇಲ್ಲ.

ರಾತ್ರಿಯಿಡೀ ಮನೆಯೆದುರು ಬೆಂಕಿ ಹಾಕಿ ಕುಳಿತೆ. ಮನೆಯೊಳಗೆ ಗಾಜಿನ ಪೆಟ್ಟಿಗೆಯಲ್ಲಿ ಮಂಜುಗಡೆಯ ತಂಪಿಗೆ ನೀನೂ ಮಂಜಾಗುತ್ತಿದ್ದೆ. ಕಿಸಾಗೋತಮಿ ಕಥೆ ನೆನಪಾಯಿತು. ಸಾವಿಲ್ಲದ ಮನೆಯ ಸಾಸಿವೆ ಗೌತಮಿಗೆ ಕೊನೆಗೂ ಸಿಗಲೇ ಇಲ್ಲ.
ಆದರೂ ಇಷ್ಟು ಬೇಗ ನನ್ನ, ನಿನ್ನ ಅಗಲುವಿಕೆ ನ್ಯಾಯವಲ್ಲ ಎನ್ನೋದು ನನ್ನ ತಕರಾರು. 25 ವಸಂತಗಳನ್ನು ದಾಟಿದ ನಂತರ ನೀನು ಸಿಕ್ಕಿದೆ, ಬಾಯಿ ತುಂಬಾ ಅಪ್ಪಾ ಎಂದು ನಿನ್ನ ಕರೆದೆ. ನಿನ್ನ ಹೆಗಲ ಮೇಲೆ ಕೈಯಿಟ್ಟಾಗ ಸಲಿಗೆ ಎಂದು ಬೈಯಲಿಲ್ಲ. ಎಪ್ಪತ್ತೈದು ದಾಟಿದ ನೀನು ಪದೇ ಪದೇ ನನ್ನ ಕೂಗಿದಾಗ ನಾನು ರೇಗಾಡಿದರೂ ಮಗಳೆಂದು ಸಹಿಸಿಕೊಂಡೆ.
ನೀನು ಕಣ್ಣಲ್ಲಿ ಕಣ್ಣಿಟ್ಟು ಸಾಕಿದೆ, ಕಿವಿಗೆ ಓಲೆ, ಜುಮುಕಿ ತಂದೆ, ಕೈಗಳಿಗೆ ಮಿನುಗು ಬಳೆಗಳನ್ನು ತಂದೆ, ಮುಡಿಗೆ ಮಲ್ಲಿಗೆ ಮೊಳ ತಂದೆ, ಕಣ್ಣಿಗೆ ಕಾಡಿಗೆ ತಂದೆ, ಕಾಲಿಗೆ ಸದ್ದುಗೈಯುವ ಗೆಜ್ಜೆ ತಂದೆ, ಮನೆ ತುಂಬಾ ಗೆಜ್ಜೆಯ ಸಪ್ಪಳ ಮಾಡಿದೆ. ಆದರೆ, ಒಂದೇ ಒಂದು ನಿನ್ನಾಸೆ ಈಡೇರಲಿಲ್ಲ, ನನಗೆ ಮೊಗ್ಗಿನ ಜಡೆ ಇಳಿಸಿ ನೋಡಬೇಕೆಂಬ ನಿನ್ನಾಸೆ ಈಡೇರಲೇ ಇಲ್ಲ. ದೇವರ ಅನ್ಯಾಯವಿದು!

Friday, July 15, 2011

ಅಮ್ಮ ತಂದ ಲಾಟರಿ

ಆಗ ಶಾಲೆಗೆ ದೊಡ್ಡ ರಜೆ. ಬೇಸಿಗೆ ರಜೆ ಅಂದ್ರೆ ಅದು ನಮ್ಮ ಪಾಲಿಗೆ ದೊಡ್ಡ ರಜೆ. ಅಕ್ಟೋಬರ್ ರಜೆ ಸಣ್ಣ ರಜೆ. ದೊಡ್ಡ ರಜೆ ಬಂದರೆ ಅಮ್ಮನಿಗೆ ಚಿಂತೆ. ಮುಂದಿನ ತರಗತಿಗೆ ಭಡ್ತಿ ಪಡೆಯೋ ಮಕ್ಕಳಿಗೆ ಹೊಸ ಯೂನಿಫಾರ್ಮ್, ಹೊಸ ಶೂ, ಹೊಸ ಬ್ಯಾಗ್, ಹೊಸ ನೋಟ್ ಬುಕ್, ಹೊಸ ಪೆನ್...ಹೀಗೆ ಮಕ್ಕಳನ್ನು ಹೊಸತರಲ್ಲಿ ಕಾಣುವ ಅಮ್ಮನ ಅತೀವ ಆಸೆ. ಅದಕ್ಕೆ ಅಮ್ಮ ಕಂಡುಕೊಳ್ಳುತ್ತಿದ್ದ ದಾರಿ ಲಾಟರಿ! ಅದು ಅವಳಿಗೆ ಬದುಕಿನ ಭರವಸೆ.


ಅಂದು ಅಮ್ಮ ಲಾಟರಿ ತಂದಿದ್ದಳು. ಊರಿನ ಬಂಟನೊಬ್ಬ ಲಾಟರಿಗೇ ಫೇಮಸ್ಸು. ಅವನಿಂದ ಲಾಟರಿ ಖರೀದಿಸಿದರೆ ಅದೃಷ್ಟ ಖಂಡಿತ ಅನ್ನೋದು ಅಮ್ಮನ ಗಟ್ಟಿ ನಂಬಿಕೆ. ವಿಶ್ವಾಸವಿದ್ದ ವ್ಯಕ್ತಿಯೊಬ್ಬ ಹೇಳಿದ ಮಾತ್ರಕ್ಕೆ, ಅಥವಾ ಅವನಿಂದ ಲಾಟರಿ ಪಡೆದರೆ ಬಹುಮಾನ ಗ್ಯಾರಂಟಿ ಅನ್ನೋ ಅಮ್ಮನ ಮುಗ್ಧತೆಯ ಮೂಢ ನಂಬಿಕೆ. ಲಾಟರಿ ತಂದ ತಕ್ಷಣ ಅದನ್ನು ದೇವರ ಫೋಟೋ ಮುಂದಿಟ್ಟು ನಮ್ಮೆಸರು ಹೇಳಿ ಕೈ ಮುಗಿದು ದೇವರೊಂದಿಗೆ ಮೌನವಾಗಿ ಮಾತನಾಡುತ್ತಿದ್ದ ಅಮ್ಮನ ದೇವಭಾಷೆ ನಮಗಂತೂ ಅರ್ಥವಾಗುತ್ತಲೇ ಇರಲಿಲ್ಲ!

ನಾನಿನ್ನೂ ಪ್ರೈಮರಿ. ಹತ್ತು ದಾಟದ ವಯಸ್ಸು. ಶಾಲೆಗೆ ರಜೆ. ದಿನಾ ಅಮ್ಮ ಸುರುಟಿದ ಬೀಡಿಗಳನ್ನು ಕೊಡಲು ಪೇಟೆಗೆ ಹೋಗುವಳು. ಅವಳ ಜೊತೆ ಪೇಟೆಗೆ ಹೋಗುವುದಂದರೆ ಬೆಂಗಳೂರಿನಲ್ಲಿ ರಜಾ ದಿನಗಳಲ್ಲಿ ಶಾಪಿಂಗ್ ಹೊರಟಹಾಗೆ! ಅಮ್ಮ ತೆಗೆದುಕೊಡುವ ನಾಲ್ಕಣೆಯ ಉರಿಗಡಲೆ ಕೂಡ ನಮಗೆ ಐಸ್ಕ್ರೀಂ, ಫ್ರುಟ್ ಸಲಾಡ್ ಸವಿದಂಥ ಖುಷಿ ನೀಡುತ್ತಿತ್ತು. ಅಮ್ಮನ ಜೊತೆಗೆ ಹೋದಾಗಲೆಲ್ಲಾ ಅಮ್ಮನ ಬಾಯಲ್ಲಿ ಲಾಟರಿ ಮಾಮನ ಕಥೆ. ಅದು ಅವಳ ಕನಸುಗಳ ದೊಡ್ಡ ಮೂಟೆಯಾಗಿರುತ್ತಿತ್ತು!

ಲಾಟರಿ ಮಾಮನ ಜೊತೆ ಲಾಟರಿ ತೆಗೆದುಕೊಂಡ್ರೆ ಶಾಲೆಗೆ ಹೋಗುವ ಹೊತ್ತಿಗೆ ಬಹುಮಾನ ಬರುತ್ತೆ. ಅರ್ಥಾತ್ ಕೈತುಂಬಾ ದುಡ್ಡು ಬರುತ್ತೆ. ಆಗ ಶಾಲೆ ಆರಂಭವಾಗುವಾಗ ಸಾಲ ಮಾಡೋ ಅಗತ್ಯವಿಲ್ಲ ಅನ್ನೋದು ಅಮ್ಮನ ಲೆಕ್ಕಾಚಾರ. ನನ್ನ, ತಮ್ಮನ ಹೆಸರಿನಲ್ಲಿ ಅಮ್ಮ ಲಾಟರಿ ತೆಗೆದುಕೊಳ್ಳುತ್ತಿದ್ದಳು. ಲಾಟರಿ ತೆಗೆದುಕೊಂಡಾಗಲೇ ತಮ್ಮ ತನಗೆ ಬೇಕಾದ ವಸ್ತುಗಳ ಉದ್ದದ ಪಟ್ಟಿ ಮುಂದಿಡುತ್ತಿದ್ದ. ಅದರಲ್ಲಿ ನಮ್ಮಿಬ್ಬರ ಪಾಲು ಆದ ಮೇಲೆ ಅಮ್ನಿಗೇನು ಅನ್ನೋ ಪ್ರಶ್ನೆ ಎದುರಾಗುತ್ತಿತ್ತು. ಅಮ್ಮನಿಗೆ ಸೀರೆ, ಚೈನು, ಬಳೆ...ಹೀಗೆ ಕೆಲವೊಂದು ವಸ್ತುಗಳ ಪಟ್ಟಿ ನಾವೇ ರೆಡಿ ಮಾಡುತ್ತಿದ್ದೇವು.


ಆಯಿತು ರಜಾ ಮುಗಿದೇ ಹೋಗುತ್ತಿತ್ತು. ಲಾಟರಿ ಮಾಮ ಸುಮ್ಮನಾಗುತ್ತಿದ್ದ. ಕೊಂಡ ಲಾಟರಿ ಸುದ್ದಿಯಾಗದೇ ಡ್ರಾ ಆಗುತ್ತಿತ್ತು. ಸಾಲ ಮಾಡಿ ಶಾಲೆಗೆ ಕಳುಹಿಸುವಾಗ ಅಮ್ಮನ ಮುಖದಲ್ಲಿ ಪುಟ್ಟ ನೋವು, ಲಾಟರಿ ಮಾಮನ ಮೇಲೆ ಸಾತ್ವಿಕ ಸಿಟ್ಟು. ಹೋಗಲಿ ಬಿಡಿ...ಇನ್ನೊಂದು ಲಾಟರಿಯಲ್ಲಿ ಬಹುಮಾನ ಬಂದೇ ಬಿಡುತ್ತೆ ಅನ್ನೋ ಮತ್ತದೇ ಹಳೆ ಮುಗ್ಧ ನಂಬಿಕೆ!

Saturday, December 25, 2010

ಅರ್ಥವಾಗದವಳು!

ಹೇಳಬೇಕನಿಸಿದರೂ ಹೇಳಲಾಗಲಿಲ್ಲ. ಬದುಕಿನ ಬಂಡಿ ಇಷ್ಟು ದೂರ ತಂದು ನನ್ನ ನಿಲ್ಲಿಸಿದೆ. ಇಳಿಹೊತ್ತು, ಇಳಿವಯಸ್ಸು. ಇಂದು ನೀನು ಏನೇ ಹೇಳಿದರೂ ಅದು ನನಗೆ ಕುತೂಹಲ, ಅಚ್ಚರಿ ಮೂಡಿಸುತ್ತೆ. ಅರ್ಥವಾಗದೆ ಬಿಟ್ಟ ಕಣ್ಣುಗಳಿಂದ ನಿನ್ನ ನೋಡಿ ‘ಏನು ಮಗನೇ?’ ಎಂದು ಕೇಳಿದರೆ, ಅದು ನಿನಗರ್ಥವಾಗಲ್ಲಮ್ಮ ಎನ್ನುತ್ತೀಯಾ. ಅಂದು ನಿನಗೆ ಅರ್ಥ ಮಾಡಿಸಿದ ಅಮ್ಮನಿಗೆ ಇಂದು ಅರ್ಥ ಮಾಡಿಸುವ ಸ್ಥಿತಿಯಲ್ಲಿ ನೀನಿಲ್ಲ . ನಿನ್ನ ಪಾಲಿಗೆ ಒಮ್ಮೊಮ್ಮೆ ಅಮ್ಮ ಅರ್ಥವಾಗದವಳು!

೬೦ ವರ್ಷದ ಹಿಂದೆ ನಿನ್ನ ಸ್ಕೂಲಿಗೆ ಕಳುಹಿಸಿದ್ದೆ. ಸೂರ್ಯ ಮುಳುಗುವ ಹೊತ್ತು ಅದೇ ಕಬ್ಬಿಣದ ಗೇಟಿನಲ್ಲಿ ನಿಂತು ಸ್ಕೂಲಿನಿಂದ ಬರುವ ನಿನಗಾಗಿ ಕಾಯುತ್ತಿದ್ದೆ. ನಿನ್ನ ‘ಅಮ್ಮಾ’ ಕರೆಗಾಗಿ. ಆ ಸಂಜೆ ಹೊತ್ತಿನಲ್ಲಿ ಉಪ್ಪಿಟ್ಟು ಮಾಡಿ ನಿನಗಾಗಿ ಕಾಯುವುದೇ ನನಗೆ ಹೆಮ್ಮೆ. ಇದು ಒಡಲಾಳದ ದನಿ. ಎಲ್ಲವೂ ನನ್ನದೆಯ ನೆನಪು.

ಕಾಲ ನಿಲ್ಲುವುದಿಲ್ಲ. ಬದುಕು ಚಲಿಸುತ್ತದೆ. ಮನುಷ್ಯ ಇದಕ್ಕೆ ಹೊರತಲ್ಲ. ಎಷ್ಟೋ ಬಾರಿ ಇದನ್ನೆಲ್ಲಾ ನಿನ್ನ ಬಳಿ ಕುಳಿತು, ನಿನ್ನ ಕಣ್ಣುಗಳನ್ನು ನೋಡುತ್ತಲೇ ಹೇಳಬೇಕನಿಸುತ್ತೆ. ಆದರೆ, ನಿನ್ನ ದಿನನಿತ್ಯದ ಜಂಜಾಟದ ನಡುವೆ ಅಮ್ಮನ ಮಾತು ಕೇಳಲು ಅದೆಲ್ಲಿ ಸಮಯವಿರುತ್ತೆ? ಎಂದು ಎಲ್ಲವನ್ನೂ ಮೌನದೊಳಗೆ ಹೂತುಬಿಡ್ತೀನಿ.

ನಿಂಗೊತ್ತು ಅಮ್ಮನಿಗೆ ೮೦ ದಾಟಿದೆ. ಕೂದಲು ಬೆಳ್ಳಿಯಾಗಿದೆ. ಹಲ್ಲುಗಳು ಕಾಣಿಸುತ್ತಿಲ್ಲ. ಮುಖದಲ್ಲಿದ್ದ ನಗುನೂ ಮಾಸುತ್ತಿದೆ. ಕಣ್ಣುಗಳು ಗುಳಿಬಿದ್ದಿವೆ. ಬೆನ್ನು ಬಾಗಿದೆ. ಹಗಲಿಡೀ ತೋಟದೊಳಗೆ ಬದುಕು ಕಂಡಿದ್ದ ಅಮ್ಮ ಇಂದು ಊರುಗೋಲು ಹಿಡಿದು ನಡೆಯುತ್ತಿದ್ದಾಳೆ. ನಿನಗೆ ಹಿಡಿ ಅನ್ನ ಉಣಿಸಿದ ಆ ಬೆರಳುಗಳು ಇಂದು ನಡುಗುತ್ತಿವೆ. ನೀನು ನಿತ್ಯ ಮಾಡಿಸುವ ಆ ಜಳಕಕ್ಕೂ ನನ್ನ ಮೈ ಒಗ್ಗುತ್ತಿಲ್ಲ. ಪ್ರೀತಿಯಿಂದ ನೀಡಿದ ಹಿಡಿತುತ್ತು ನನಗೆ ರುಚಿಸುತ್ತಿಲ್ಲ.ಅರ್ಥವಿಲ್ಲದ ಕನಸುಗಳಿಗೂ ಜೀವವಿಲ್ಲ. ಪ್ರೀತಿಯ ಸವಿ ಅನುಭವಿಸುವ ಹೊತ್ತುನೂ ಕಳೆದುಹೋಗಿದೆ. ನಿನಗನಿಸಬಹುದು ಅಮ್ಮ ಅರ್ಥವಾಗದವಳು!, ಆದರೆ ಇದು ಅರ್ಥವಾಗದ ವಯಸ್ಸು. ಕಾಲ ಹಕ್ಕಿಯಂತೆ ಹಾರುತಿದೆ. ಈಗ ನನಗೆ ಕೊನೆಯ ಹೊತ್ತು.
೪೦ ವರ್ಷದ ಹಿಂದೆ ನೋಡಿದ ಕಸ್ತೂರಿ ನಿವಾಸದ ಹಾಡು ನೆನಪಾಗುತ್ತದೆ.

ಮೈಯನ್ನೇ ಹಿಂಡಿ ನೊಂದರೂ
ಕಬ್ಬು ಸಿಹಿಯ ಕೊಡುವುದು

ತೇಯುತಲಿದ್ದರೂ ಗಂಧದ ಪರಿಮಳ
ತುಂಬಿ ಬರುವುದು
ತಾನೇ
ಉರಿದರೂ ದೀಪವು ಮನೆಗೆ
ಬೆಳಕು ತರುವುದು....


ಪ್ರಕಟ: http://www.hosadigantha.in/epaper.php?date=12-08-2010&name=12-08-2010-13

Friday, December 3, 2010

ಬೆಳ್ಳಿ ಕಾಲುಂಗುರ


ಸುತ್ತಲೂ ವಾದ್ಯ, ಜಾಗಟೆಗಳ ಸದ್ದು. ನೆರೆದವರ ಮನಸ್ಸು ಸಂಭ್ರಮದ ಕಡಲು. ನಮಗರ್ಥವಾಗದ ಪುರೋಹಿತರ ಸಾಲು ಸಾಲು ಶ್ಲೋಕಗಳು. ಆಗ ತಾನೇ ನೀನು ನನ್ನ ಕೊರಳಿಗೆ 'ತಾಳಿ'ಯಾಗಿದ್ದೆ. ನನ್ನ ಮುಖದಲ್ಲಿ ಮುತ್ತೈದೆಯ ರಂಗು. ನಿನ್ನ ಮುಖದಲ್ಲಿ ಮಲ್ಲಿಗೆ ನಗು, ನಾಳಿನ ‘ರವಸೆಗಳು, ಹಸಿರಸಿರು ಕನಸುಗಳು. ಅಂದು ನೀನು ನನ್ನ ಕಾಲು ಮುಟ್ಟಿದಾಗ ಒಂದು ಕ್ಷಣ ಅಚ್ಚರಿ, ಭಯ, ನಾಚಿಕೆ. ಕೆನ್ನೆಯಲ್ಲಿ ಏಳು ಬಣ್ಣದ ರಂಗೋಲಿ. ನನ್ನ ಪುಟ್ಟ ಬಿಳಿಪಾದ, ಅದರ ತುದಿಯಲ್ಲಿರುವ ಆ ಸಣ್ಣ ಬೆರಳುಗಳು ನಿನ್ನ ಸ್ಪರ್ಶಕ್ಕೆ ಕಂಪಿಸತೊಡಗಿದವು. ಆದರೂ, ನನ್ನ ಮನಸ್ಸಿನಲ್ಲಿ ಖುಷಿಯ ಮೃದಂಗ.
ಬೆಳ್ಳಿ ಕಾಲುಂಗುರ
ಅಮ್ಮ ಹೇಳಿದ್ದ ನೆನಪು: ಗಂಡ ಒಂದೇ ಒಂದು ಸಲ ತನ್ನ ಹೆಂಡತಿಯ ಕಾಲನ್ನು ಮುಟ್ಟುತ್ತಾನಂತೆ, ಅದು ಕಾಲುಂಗುರ ತೊಡಿಸುವಾಗ. ಹೌದು, ನೀನು ಅಂದು ನನ್ನ ಕಾಲು ಮುಟ್ಟಿದ್ದೆ. ಅದೇ ಮೊದಲು. ಅದು ನನ್ನ ಜೀವನದ ಅಮೂಲ್ಯ ಕ್ಷಣವಾಗಿತ್ತು. ಬೆಳ್ಳಿ ಕಾಲುಂಗುರವನ್ನು ನನ್ನ ಆ ಪುಟ್ಟ ಬೆರಳುಗಳಿಗೆ ಹಾಕಿದ್ದೆ. ನನ್ನ ಮನಸ್ಸಲ್ಲಿ ಆ ಕ್ಷಣ ನೀನು ಗೊತ್ತು ಮಾಡಿದ ಪುಟ್ಟ ಬಾಡಿ ಗಾರ್ಡ್ ಅನಿಸಿತ್ತು. ಹೌದು, ನೀನು ಜೊತೆಗಿಲ್ಲದ ಸಮಯದಲ್ಲಿ ಅದು ನನ್ನ ಬಾಡಿ ಗಾರ್ಡ್, ಅದು ನೀನು ನನಗೆ ನೀಡಿದ ಆಣೆಯ ಉಡುಗೊರೆ. ಅದನ್ನು ಕಂಡರೆ ನನಗೆ ಗೌರವ, ನೀನೆಂಬ ಪ್ರೀತಿ. ನೀನು ತೊಡಿಸಿದ್ದೆಂಬ ಅಗಾ‘ ಹೆಮ್ಮೆ. ಆಗಾಗ ಅದನ್ನು ನೋಡಿ ಖುಷಿಪಡುತ್ತೇನೆ. ದಾರಿಗುಂಟ ಸಾಗುವಾಗ ನನ್ನನ್ನೇ ದಿಟ್ಟಿಸಿ ನೋಡುವ ಅದೆಷ್ಟೋ ಕಣ್ಣುಗಳಿಗೆ ನನ್ನ ಕಾಲುಂಗುರವೇ ಉತ್ತರ ಹೇಳುತ್ತದೆ. ಬೆಳ್ಳಿ ಕಾಲುಂಗುರ ಎಂದಾಗ ನೆನಪಾಗುವುದು ಅದೇ ಹಾಡು

ಬಾಳ ಕಡಲಲಿ ಪ್ರೇಮ ನದಿಗಳ ಸಂಧಿ

ಸಮಯದಲಿ ಮಿಂಚುವ ಮಿನುಗುವ ಸಾಕ್ಷಿ ಈ ಕಾಲುಂಗುರ

ನಾದಗಡಲಲಿ ವೇದ ಘೋಷದ ಸಪ್ತಪದಿಗಳಲಿ

ಬದುಕಿನ ಬಂಡಿಗೆ ಸಾರಥಿ ಕಾಲುಂಗುರ

ಶುಕವ ತರುವ ಸತಿ ಸುಖವ ಕೊಡುವ

ಮನ ಮನೆಯ ನೆಲದಲಿ ಗುನುಗುವ ಒಡವೆಯೋ....