Monday, June 29, 2009

ಅದ್ಯಾಕೋ ಅಕ್ಷರಗಳು ಖಾಲಿ ಪುಟದಲಿ ಮೂಡಲಿಲ್ಲ..!

ನಾನ್ಯಾಕೆ ಬರೆಯುತ್ತೇನೆ? ಅದೇ ನನ್ನ ಖುಷಿಗೆ, ನನ್ನ ಬರಹದ ತುಡಿತವನ್ನು ಇಲ್ಲಿ ಹಂಚಿಕೊಳ್ಳೋದಕ್ಕೆ. ನನ್ನೊಳಗಿನ ಪುಟ್ಟ ಪುಟ್ಟ ಖುಷಿಯ ಕ್ಷಣಗಳನ್ನು ನಿಮ್ಮ ಜೊತೆ ಹಂಚಿಕೊಳ್ಳೋದಕ್ಕೆ. ಮನದ ಮೂಲೆಯಲ್ಲಿದ್ದ ದುಗುಡ-ದುಮ್ಮಾನಗಳನ್ನು ನಿಮ್ಮ ಜೊತೆ ಹಂಚಿಕೊಂಡು ಮನಸ್ಸು ತಿಳಿಯಾಗಿಸೋದಕ್ಕೆ. ನನ್ನೊಳಗಿನ ಕನಸುಗಳನ್ನು ನಿಮ್ಮ ಜೊತೆ ಹಂಚಿ, ವಿಶ್ ಪಡೆಯೋದಕ್ಕೆ. ಹೌದು. ಹೇಳಲಾಗದ ಮಾತು, ಬಚ್ಚಿಡಲಾಗದ ಭಾವನೆಗಳನ್ನು ಇಲ್ಲಿ ಬಿಚ್ಚಿಡೋದಕ್ಕೆ. ಜಗತ್ತಿನ ಸತ್ಯ-ಮಿಥ್ಯಗಳನ್ನು ಕಂಡು ಕಂಗಳು ನೀರಾದಾಗ ಮನಸ್ಸು ಶುಭ್ರಗೊಳಿಸೋದಕ್ಕೆ ನಾ ಬರೆಯುತ್ತೇನೆ. ಜೀವನ ಪ್ರೀತಿಯಲ್ಲಿ ಮಿಂದು ಮನಸ್ಸು ಖುಷಿಗೊಂಡಾಗ 'ಬದುಕೆಷ್ಟು ಸುಂದರ' ಅಂತ ಖುಷಿಯಿಂದ ಬರೆದುಬಿಡ್ತೀನಿ. ಅದೇ ಇರೋ ಜೀವನದಲ್ಲಿ ಪುಟ್ಟ ಕಷ್ಟಗಳನ್ನೇ ಸಹಿಸಿಕೊಳ್ಳಲಾಗದೆ ಹೃದಯ ಭಾರವಾದಾಗ ಮತ್ತದೇ ಬೇಸರ..ಅದೇ ಹಾಡು..ಅನ್ನೋಕೂ ಈ ಅಕ್ಷರಲೋಕವೇ ಸಾಥ್ ನೀಡೋದು.

ತುಂಬಾ ದಿನಗಳಾಯ್ತು...ಏನೂ ಬರೆಯಕ್ಕಾಗ್ತಿಲ್ಲ. ..ಬರೆಯಲಿಲ್ಲ. ಒಂದಷ್ಟು ಕೆಲಸ ಹೆಗಲ ಮೇಲೆ ಬಿದ್ದಾಗ, ಒಂದಷ್ಟು ಹೊತ್ತು ವ್ಯರ್ಥ ಮಾತುಗಳಲ್ಲಿ ಕಳೆದುಹೋದಾಗ, ಮನೆಯ ಚಿಂತೆ ಕಾಡತೊಡಗಿದಾಗ..ಏನೋ ಒಂಥರಾ ಮನಸ್ಸು ಗೊಂದಲಗಳಲ್ಲಿ ಸಿಕ್ಕಾಗ ಬರೆಯಲು ಕುಳೀತರೂ ಬರೆಯಲಕ್ಕಾಗುತ್ತಿಲ್ಲ. ನನ್ನೊಳಗಿನ ಮಾತುಗಳಿಗೆ ಈ ಬ್ಲಾಗ್ ವೇದಿಕೆ ಅಂದ್ರೂ ಆಗ್ತಿಲ್ಲ. ತುಂಬಾ ನನ್ನನ್ನು ನಾನೇ ಬೈದುಕೊಂಡಿದ್ದೆ. ಹೀಯಾಳಿಸಿಕೊಂಡಿದ್ದೆ. ಖಾಲಿ ಪುಟಗಳನ್ನು ರಾಶಿ ಹಾಕೊಂಡು ಏಕಾಂಗಿಯಾಗಿ ಪೆನ್ನು ಹಿಡಿದು ಕುಳಿತರೂ ಕೈಗಳಲ್ಲಿ ಅಕ್ಷರಗಳು ಮೂಡುತ್ತಿಲ್ಲ, ಭಾವನೆಗಳು ಮಾತಾಡುತ್ತವೆ. ಕಣ್ಣುಗಳು ಮಾತಾಡುತ್ತವೆ, ಮೌನಗಳೂ ಮಾತಾಡುತ್ತವೆ. ಕಿವಿ ಇಂಪಾದ ಹಾಡುಗಳತ್ತ ತುಡಿಯುತ್ತದೆ. ಹೃದಯ ಜೀವನಪ್ರೀತಿಯ ಹುಡುಕಾಟದಲ್ಲಿ ಕಳೆಯುತ್ತೆ. ಮನಸ್ಸು ಮಣ್ಣುಗೂಡಿದ ಪ್ರೀತಿಯನ್ನು ನೆನೆಯುತ್ತೆ. ಆದರೆ ಅಕ್ಷರಗಳು ಖಾಲಿ ಪುಟದ ಮೇಲೆ ಬೀಳುತ್ತಿಲ್ಲ. ಕೈಯಲ್ಲಿರುವ ಪೆನ್ನು ಖಾಲಿ ಪುಟದ ಮೇಲೆ ಬಿಂದುವನ್ನಷ್ಟೇ ಇಟ್ಟು ಸುಮ್ಮನಿದ್ದೆ.

ಏನೇನೋ ಯೋಚನೆಗಳು..ಅಮೂರ್ತ ಕಲ್ಪನೆಗಳು. ಸತ್ಯ, ಪ್ರಾಮಾಣಿಕತೆ, ನಿಷ್ಕಲ್ಮಶ ಪ್ರೀತಿ ಯಾಕೋ ಢಾಳಾಗಿ ಕಾಣುತ್ತವೆ. ಪ್ರಾಮಾಣಿಕವಾಗಿ ಕೆಲ್ಸ ಮಾಡಿದ್ರೂ ಬಾಸ್ ಕೈಯಲ್ಲಿ ಬೈಸಿಕೊಳ್ತೀವಿ. ಬದುಕಿನಲ್ಲಿ ಮಾನವೀಯ ಬಾಂಧವ್ಯ, ಜೀವನಪ್ರೀತಿಯ ಕುರಿತು ಮಾತನಾಡೋರು ವೇದಿಕೆ ಮೇಲೆಯಷ್ಟೇ ಗೊಣಗುತ್ತಾರೆ. ಜೀವನ ಅಂದ್ರೆ ನಮ್ಮೂರ ಆಟದ ಮೈದಾನ ಅನ್ನೋರು ಕೆಲವರು, ಇನ್ನು ಕೆಲವರು ಜೀವನನಾ ಸೀರಿಯಸ್ ಆಗಿ ತಕೋಪಾ ಅಂತ ಬೋಧನೆ ಮಾಡ್ತಾರೆ. ಆದರೆ ಬೋಧನೆ ಮಾಡಿದವರಾರು ನಿಜವಾದ ಜೀವನಾನ ಕಂಡೋರಿಲ್ಲ, ಜೀವನದಲ್ಲಿ ಉದ್ದಾರವೂ ಆಗಿಲ್ಲ! ಇರಲಿ ಏನೇನೋ ಯೋಚನೆಗಳು..

ನೆನಪಾದುವು ಜಿ.ಎಸ್.ಎಸ್. ಅವರ ಕವನದ ಸಾಲುಗಳು.......
ನಾನು ಬರೆಯುತ್ತೇನೆ...
ನನ್ನ ಸಂವೇದನೆಗಳನ್ನು,
ಕ್ರಿಯೆ-ಪ್ರತಿಕ್ರಿಯೆಗಳನ್ನು,
ದಾಖಲು ಮಾಡುವುದಕ್ಕೆ..!
ನಿಂತ ನೀರಾಗದೆ ಮುಂದಕ್ಕೆ
ಹರಿಯುವುದಕ್ಕೆ...
ನನ್ನನ್ನು ನಾನು ಕಂಡುಕೊಳ್ಳುವುದಕ್ಕೆ...
ನಾನು ಬರೆಯುತ್ತೇನೆ
ಋಷಿಯ ನೋವಿಗೆ...
ರೊಚ್ಚಿಗೆ ಮತ್ತು ಹುಚ್ಚಿಗೆ..
ಅಥವಾ ನಂದಿಸಲಾರದ ಕಿಚ್ಚಿಗೆ...!


ಹೌದು..ಮತ್ತೆ ನಾನು ಬರೆಯುತ್ತೇನೆ..ನನ್ನೊಳಗನ್ನು ತೆರೆದಿಡುತ್ತೇನೆ..ಮುಂದಿನ ಬರಹ ಸದ್ಯದಲ್ಲಿಯೇ ನಿಮ್ಮೆದುರು ಕಾಣಲಿದೆ. ಬರ್ತಾ ಇರಿ..ಬೆನ್ನುತಟ್ಟುತ್ತಿರಿ..